
ಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಒಬ್ಬ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 7ರ ವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ಮೂವರು ಆರೋಪಿಗಳನ್ನು ಬುಧವಾರ 39ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಧಾನಸೌಧ ಠಾಣೆ ಪೊಲೀಸರು ಹಾಜರು ಪಡಿಸಿದರು. ಬಂಧಿತ ಮೂವರ ಪೈಕಿ ಆರ್.ಟಿ.ನಗರದ ಮುನಾವರ್, ನವದೆಹಲಿಯ ಮಹಮ್ಮದ್ ಇಲ್ತಾಜ್ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬ್ಯಾಡಗಿ ತಾಲ್ಲೂಕಿನ ಮೊಹಮ್ಮದ್ ಶಫಿ ನಾಶಿಪುಡಿಯನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ವಿಧಾನಸೌಧದಲ್ಲಿ ಫೆ.27ರಂದು ಸೈಯದ್ ನಾಸಿರ್ ಹುಸೇನ್ ಅವರ ಗೆಲುವಿನ ಸಂಭ್ರಮಾಚರಣೆ ವೇಳೆ ಸಾಕಷ್ಟು ಮಂದಿ ಹಾಜರಿದ್ದರು. ಇವರ ಮಧ್ಯೆಯೇ ಮೂವರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು ಎಂಬ ಆರೋಪ ಮೇರೆಗೆ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಸಂಭ್ರಮಾಚರಣೆ ವೇಳೆ ಘೋಷಣೆ ಕೂಗಿದ ವಿಡಿಯೊವನ್ನು ತೋರಿಸಲಾಗಿದೆ ಎಂದು ಪೊಲೀಸರು ಹೇಳಿದರು.


