
ಕಡಬ ತಾಲೂಕು ಪಂಚಾಯತ್ ಗೆ ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಿತಿಗಿಂತ ಹೆಚ್ಚು ಆದಾಯ ಹೊಂದಿದ ದೂರಿನ ಹಿನ್ನೆಲೆ ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.
ಈ ದೂರಿನ ತನಿಖೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕಡಬಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೆ ವೇಳೆ ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ. ಜಯಣ್ಣ ಅವರು ವಾಸ್ತವ್ಯವಿದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್. ಇನ್ಸ್ ಪೆಕ್ಟರ್ ಲೋಕೇಶ್ , ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದಾರೆ


