

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಆದಿನ ಅಪರಾಹ್ನ 1 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಲಕ್ಷಾಂತರ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಚುನಾವಣಾ ಸಮಿತಿಯ ಪ್ರಧಾನ ಸಂಚಾಲಕರೂ ಆಗಿರುವ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೋದಿಯವರು ಮಂಗಳೂರಿನ ಕಾರ್ಯಕ್ರಮದ ನಂತರ ಬೆಂಗಳೂರಿಗೆ ತೆರಳಲಿದ್ದು ಅಲ್ಲಿ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿ.ಸುನಿಲ್ ಕುಮಾರ್ ತಿಳಿಸಿದರು.
ಈಗಾಗಲೇ ಮೊದಲ ಹಂತದ ಚುನಾವಣಾ ಪ್ರಚಾರ ಪ್ರಕ್ರಿಯೆಗಳು ಭರದಿಂದ ಸಾಗುತ್ತಿದ್ದು ಈ ಬಾರಿ ದೊಡ್ಡ ಪ್ರಮಾಣದ ಸಭೆಗಳನ್ನು ಹೊರತುಪಡಿಸಿ ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸುವ ಪ್ರಕ್ರಿಯೆಗೆ ಹೆಚ್ಚು ಒತ್ತು ನೀಡಲಾಗಿದೆ. ಏ.10 ಮತ್ತು 11ರಂದು ಏಕಕಾಲದಲ್ಲಿ ರಾಜ್ಯದ 58 ಸಾವಿರ ಬೂತ್ಗಳಲ್ಲಿ ಬೂತ್ ಸಮಿತಿ ಸಭೆಗಳು ನಡೆಯಲಿದ್ದು ಇದು ರಾಜ್ಯದಲ್ಲೇ ಮೊತ್ತ ಮೊದಲ ಬಾರಿ ಬೂತ್ ಸಮಿತಿ ಸಭೆಯ ದಾಖಲೆಯಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಮೊದಲ ಹಂತದ ಮನೆ ಮನೆ ಭೇಟಿ ನೀಡಿ, ಪ್ರಚಾರ ಮಾಡುವ ಕಾರ್ಯವು ಏ.15, 16, 17ರಂದು ನಡೆಯಲಿದ್ದು ಮೋದಿ ಅವರ ಆಗಮನವು ಕಾರ್ಯಕರ್ತರಿಗೆ ಹೊಸ ಉತ್ಸಾಹವನ್ನು ನೀಡಲಿರುವುದು. ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.
ಕೇಂದ್ರ ಸರ್ಕಾರದ 10 ವರ್ಷಗಳ ಸಾಧನೆ ಹಾಗೂ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಯಾಕೆ ಆರಿಸಬೇಕು ಎಂಬ ಬಗ್ಗೆ ಈ ಪ್ರಚಾರ ಕಾರ್ಯದಲ್ಲಿ ಮತದಾರರಿಗೆ ಅರಿವು ಮೂಡಿಸಲಾಗುವುದು ಎಂದರು. ಸಾಂಸ್ಕೃತಿಕ ಭಾರತ, ವಿಕಸಿತ ಭಾರತ, ಸುರಕ್ಷಿತ ಭಾರತ ಈ ಮೂರು ವಿಷಯಗಳಿಗೆ ನ್ಯಾಯ ಮತ್ತು ಹೊಸ ಸ್ವರೂಪ ಕೊಟ್ಟದ್ದು ನರೇಂದ್ರ ಮೋದಿ ಅವರ ಆಡಳಿತ. ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ ಎಂದು ಸುನಿಲ್ ಕುಮಾರ್ ವಿವರಿಸಿದರು.
ನಕ್ಸಲ್ ಚಟುವಟಿಕೆಯು ರಾಜ್ಯದಲ್ಲಿ ನಿಯಂತ್ರಣದಲ್ಲಿದ್ದು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ದ.ಕ. ಜಿಲ್ಲೆ, ಮಡಿಕೇರಿಗಳಲ್ಲಿ ಕಂಡು ಬಂದಿದೆ. ಸರ್ಕಾರದ ಮೃದು ಧೋರಣೆ ಇದಕ್ಕೆ ಕಾರಣವಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ, ಗೃಹ ಸಚಿವರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಈ ತನಕ ಗಮನ ಹರಿಸಲಿಲ್ಲ ಎಂದು ಆರೋಪಿಸಿದ ಸುನಿಲ್ ಕುಮಾರ್, ಕೂಡಲೇ ಸರ್ಕಾರವು ದುಷ್ಟ ಶಕ್ತಿಗಳನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಆರ್ವಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.



