ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ.

ಹೊಳೆನರಸೀಪುರ ಶಾಸಕ ಹೆಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಆರಂಭಿಸಿದೆ.

ಸಂತ್ರಸ್ತರ ಮಹಿಳೆಯರಲ್ಲಿ ಒಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಪ್ರಕರಣ ಭುಗಿಲೆದ್ದಿದೆ. ಅಲ್ಲದೆ ಲೈಂಗಿಕ ದೌರ್ಜನ್ಯದ ಅಶ್ಲೀಲ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪೊಲೀಸರು ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು 1 ಮತ್ತು ಪ್ರಜ್ವಲ್ ರೇವಣ್ಣ ಅವರನ್ನು 2ನೇ ಆರೋಪಿಗಳನ್ನಾಗಿ ಮಾಡಲಾಗಿದೆ.
ಮನೆಯಲ್ಲಿ ಒಬ್ಬಳೇ ಇದ್ದಾಗ ರೇವಣ್ಣ ಮತ್ತು ಪ್ರಜ್ವಲ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅಂದಾಜು 2,876 ಮಹಿಳೆಯರನ್ನು ಪ್ರಜ್ವಲ್ ಶೋಷಣೆ ಮಾಡಿದ್ದಾರೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹೇಳಿದ್ದು, ಈ ಸಂಬಂಧ ತಮ್ಮ ವಾಟ್ಸಾಪ್ ಖಾತೆಯಲ್ಲಿ ದೂರನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಹಾಸನ ಜಿಲ್ಲೆಯ ಬೇಲೂರಿನ ನವೀನ್ ಗೌಡ ವಿರುದ್ಧ ಪ್ರಜ್ವಲ್ ಎಫ್‌ಐಆರ್ ದಾಖಲಿಸಿದ್ದಾರೆ, ಅಲ್ಲದೆ, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ.ವಿಡಿಯೋವನ್ನು ಸಡಷ್ಟಿಸಲಾಗಿದ್ದು, ಚುನಾವಣೆ ವೇಳೆ ನನ್ನ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಿದ ಒಂದು ದಿನದ ನಂತರ ಪ್ಪಜ್ವಲ್ ಅವರು ಎಫ್‌ಐಆರ್ ದಾಖಲಿಸಿದ್ದಾರೆ. ಈ ನಡುವೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಆಯೋಗ ಸರ್ಕಾರವನ್ನು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ವರದಿಯನ್ನು ಶೀಘ್ರಗತಿಯಲ್ಲಿ ಸಲ್ಲಿಸುವಂತೆ ಸರ್ಕಾರ ಎಸ್‌ಐಟಿಗೆ ಸೂಚಿಸಿದೆ.

ಸರ್ಕಾರದ ಸೂಚನೆ ಬೆನ್ನಲ್ಲೇ ಎಸ್‌ಐಟಿ ಹಾಸನದ ಆರ್‌ಸಿ ರಸ್ತೆಯಲ್ಲಿರುವ ಎಂಪಿ ಕ್ವಾರ್ಟರ್ಸ್‌ನಲ್ಲಿ ತನಿಖೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ, ಸಂತ್ರಸ್ತ ಮಹಿಳೆಯರು ಮುಂದೆ ಬಂದರೆ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಸಾಧ್ಯತೆಗಳಿವೆ.

ಎಸ್ಐಟಿ ತಂಡ ವೀಡಿಯೊಗಳಿರುವ ಪೆನ್ ಡ್ರೈವ್‌ಗಳನ್ನು ಸಂಗ್ರಹಿಸುತ್ತಿದ್ದು, ಹೆಚ್ಚಿನ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನಿಸಲು ಮುಂದಾಗಿದೆ. ಅಲ್ಲದೆ, ಪ್ರಕರಣದಲ್ಲಿ ಆರೋಪಿಗಳಾಗಿರುವ ಪ್ರಜ್ವಲ್ ಹಾಗೂ ರೇವಣ್ಣ ಅವರಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿದ್ದು, ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಲುಕ್‌ಔಟ್ ನೋಟಿಸ್’ನ್ನು ಶೀಘ್ರದಲ್ಲೇ ಜಾರಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರದಂದು 2ನೇ ಹಂತದ ಮತದಾನ ಮುಗಿದ ನಂತರ ಪ್ರಜ್ವಲ್ ಮತ್ತು ಅವರ ಸ್ನೇಹಿತರು ಶನಿವಾರ ಏಳು ದಿನಗಳ ಪ್ರವಾಸಕ್ಕೆಂದು ಜರ್ಮನ್’ಗೆ ತೆರಳಿದ್ದಾರೆಂದು ವರದಿಗಳು ತಿಳಿಸಿವೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಎಚ್.ಡಿ.ರೇವಣ್ಣ ವಿರುದ್ಧ ಅವರ ತವರಿನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *