
ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ – ದಾಖಲಾದ ಪ್ರಕರಣಕ್ಕೆ ಸಂಪೂರ್ಣ ತನಿಖೆ ನಡೆಸಿ ಕೋರ್ಟ್ಗೆ ವರದಿ ಸಲ್ಲಿಸುತ್ತೇವೆ-ಪುತ್ತೂರಿನಲ್ಲಿ ಎಸ್ಪಿ ಯತೀಶ್ ಎನ್ ಹೇಳಿಕೆ.
ಪುತ್ತೂರು: ಆ.20ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿನಿಗೆ ಇರಿತ ಆರೋಪದ ಕುರಿತು ಆರಂಭದಲ್ಲಿ ವಿದ್ಯಾರ್ಥಿನಿ ಹೇಳಿಕೆಯಂತೆ ದಾಖಲಾದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ.
ಅವರುಪುತ್ತೂರು ನಗರ ಠಾಣೆಗೆ ಇಂದು ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದರು.
ಪ್ರಕರಣದ ಕುರಿತು ವಿದ್ಯಾರ್ಥಿನಿಯು ನೀಡಿದ ಹೇಳಿಕೆ ಮೇರೆಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ಆರಂಭಿಸಿದ್ದೇವೆ, ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಹೊರಬರುವ ಸತ್ಯಾಸತ್ಯತೆಯನ್ನು ಆಧರಿಸಿ ಸಮಗ್ರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ. ತನಿಖೆಯ ವೇಳೆ ಹೆಚ್ಚಿನ ವಿಚಾರಗಳನ್ನು ಪ್ರಸ್ತಾಪ ಮಾಡಲು ಸಾಧ್ಯವಾಗುವುದಿಲ್ಲ.
ವೈಜ್ಞಾನಿಕವಾಗಿ, ಕಾನೂನಾತ್ಮಕವಾಗಿ ಹೇಗೆ ತನಿಖೆ ಮಾಡಬೇಕೋ ಹಾಗೆ ಪಾರದರ್ಶಕ ತನಿಖೆಯನ್ನು ಮಾಡುತ್ತೇವೆ. ಸಂಪೂರ್ಣ ತನಿಖೆಯ ಬಳಿಕ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


