
ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿರುವ ಕುರಿತು ವರದಿಯಾಗಿದೆ.
ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಈ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದಾರೆ.
ಇಂಟರ್ನೆಟ್ ಮೂಲಕ ಬಂದಿರುವ ಬೆದರಿಕೆ ಕರೆಯಲ್ಲಿ ಹಿಂದಿ, ಮರಾಠಿ, ಇಂಗ್ಲೀಷ್, ತುಳು ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆ ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆದರಿಕೆ ಕರೆ ಮಾಡಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


