
ಪಿಲಿನಲಿಕೆ ಪ್ರತಿಷ್ಠಾನದ ಸಂಸ್ಥಾಪಕ, ಯುವನಾಯಕ ಎಂ. ಮಿಥುನ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಪಿಲಿನಲಿಕೆ ಪಂಥಕ್ಕೆ ಹತ್ತನೇ ವರ್ಷದ ಸಂಭ್ರಮವಾಗಿದ್ದು, ಅ.1ರಂದು ನಡೆಯಲಿರುವ ‘ಪಿಲಿನಲಿಕೆ ಪಂಥ-10’ ಕ್ಕೆ ಕರಾವಳಿ ಉತ್ಸವ ಮೈದಾನ ಸಜ್ಜುಗೊಳ್ಳುತ್ತಿದೆ ಎಂದು ಅವಿನಾಶ್ ಸುವರ್ಣ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಶಿವಶರಣ್ ಶೆಟ್ಟಿ ನೇತೃತ್ವದ ನಮ್ಮ ಟಿವಿ ಸಹಭಾಗಿತ್ವವಹಿಸುತ್ತಿದ್ದಾರೆ. ಈ ಬಾರಿ ಸೆಲೆಬ್ರಿಟಿಗಳ ದಂಡೇ ಪಿಲಿನಲಿಕೆ ಪಂಥಕ್ಕೆ ಆಗಮಿಸಲಿದೆ. ಸಿನಿಮಾ ನಟರಾದ ಸುನೀಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ಕ್ರಿಕೆಟ್ ತಾರೆಗಳಾದ ಅಂಜಿಕಾ ರಹಾನೆ, ಜಿತೇಶ್ ಶರ್ಮಾ, ಇಂಡಿಯನ್ ಬಾಕ್ಸರ್ ವಿಜೇಂದ್ರ ಸಿಂಗ್, ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ಸಿನಿಮಾ, ಕ್ರೀಡಾ ಕ್ಷೇತ್ರದ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಕಕಾಲಕ್ಕೆ 25 ಸಾವಿರಕ್ಕೂ ಅಧಿಕ ಮಂದಿಗೆ ಕುಳಿತುಕೊಂಡು ಸ್ಪರ್ಧೆ ವೀಕ್ಷಿಸಲು ಆಸನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಪಿಲಿನಲಿಕೆಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡಗಳಿಗೂ 20 ನಿಮಿಷ ಕಾಲಾವಕಾಶ ನೀಡಲಾಗುವುದು. ಬೆಳಗ್ಗೆ 10ಗಂಟೆಗೆ ಆರಂಭವಾಗುವ ಸ್ಪರ್ಧೆ ರಾತ್ರಿ 10ರವರೆಗೆ ನಡೆಯಲಿದೆ ಎಂದರು.
ಪಿಲಿನಲಿಕೆ ಪಂಥ ಸ್ಪರ್ಧೆಗೆ ಅಂತಿಮವಾಗಿ ಅಗತ್ಯ ಮಂಗಳೂರು, ಶ್ರೀ ವೈದ್ಯನಾಥೇಶ್ವರ ಫ್ರೆಂಡ್ಸ್ ಟೈಗರ್, ಮುಳಿಹಿತ್ತು ಗೇಮ್ಸ್ ಟೀಮ್, ಅನಿಲ್ ಕಡಂಬೆಟ್ಟು, ಜೂನಿಯರ್ ಬಾಯ್ಸ್ ಚಿಲಿಂಬಿ, ಎಮ್ಮೆಕೆರೆ ಫ್ರೆಂಡ್ಸ್ ಸರ್ಕಲ್, ಟ್ಯಾಲೆಂಟ್ ಟೈಗರ್ಸ್ ತುಳುನಾಡು, ಸೋಮೇಶ್ವರ ಫ್ರೆಂಡ್ಸ್ ಕ್ಲಬ್,ಪೋಳಲಿ ಟೈಗರ್ಸ್,ಗೋರಕ್ಷನಾಥ ಹುಲಿ ಸೇರಿ 10 ತಂಡಗಳನ್ನು ಆಯ್ಕೆ ಮಾಡಲಾಗಿದೆ.
ಪಿಲಿನಲಿಕೆ ಪಂಥ ಕಾರ್ಯಕ್ರಮವನ್ನು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಸೇರಿದಂತೆ ಸಂಸದರು, ಶಾಸಕರು ಆಗಮಿಸಲಿದ್ದಾರೆ.
2025ರ ‘ಪಿಲಿನಲಿಕೆ-10’ ಸ್ಪರ್ಧೆಯಲ್ಲಿ ಒಟ್ಟು 20 ಲಕ್ಷ ರೂ. ಬಹುಮಾನ ನಿಗದಿಪಡಿಸಲಾಗಿದೆ. ಪ್ರಥಮ ಬಹುಮಾನ 10 ಲಕ್ಷ ರೂ. ಮತ್ತು ಫಲಕ, ದ್ವಿತೀಯ 5ಲಕ್ಷ ರೂ. ಮತ್ತು ಫಲಕ, ತೃತೀಯ 3ಲಕ್ಷ ರೂ. ಬಹುಮಾನ ಮತ್ತು ಫಲಕ ನೀಡಲು ನಿರ್ಧರಿಸಲಾಗಿದೆ. ಪ್ರತಿ ತಂಡಕ್ಕೆ 50ಸಾವಿರ ರೂ. ಗೌರವ ಧನ ನೀಡಲಾಗುವುದು, ಕಪ್ಪುಹುಲಿ, ಮರಿಹುಲಿ, ತಾಸೆ ತಂಡ, ಮುಡಿ ಬಿಸಾಡುವುದು, ಬಣ್ಣಗಾರಿಕೆ ಸೇರಿದಂತೆ 6 ವೈಯಕ್ತಿಕ ಪ್ರಶಸ್ತಿಗಳಿಗೆ 50ಸಾವಿರ ಬಹುಮಾನ ಹಾಗೂ ಫಲಕ ಸಿಗಲಿದೆ.
ಪಿಲಿನಲಿಕೆ ಪಂಥಕ್ಕೆ ಈ ಬಾರಿ ದಶಮ (ಹತ್ತು) ಸಂಭ್ರಮ ಹಿನ್ನೆಲೆಯಲ್ಲಿ ಮೂಡುಬಿದಿರೆ ಸರಕಾರಿ ತಾಲೂಕಿನ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅದರ ಅಭಿವೃದ್ಧಿಗೆ ಶ್ರಮಿಸಲು ನಿರ್ಧರಿಸಲಾಗಿದೆ.
10 ತಂಡಗಳು ಹಾಗೂ ಬಹುಮಾನ ಮೊತ್ತ 26ಲಕ್ಷ ರೂ.ಗೆ ಏರಿಕೆಯಾಗಿದೆ.
ಸಹಕಾರಿ ರತ್ನ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವ ಸನ್ಮಾನ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಡಾ.ಶಿವಶರಣ್ ಶೆಟ್ಟಿ, ಗೌರವಾಧ್ಯಕ್ಷರು ಆನಂದ್ ರಾಜ್ ಶೆಟ್ಟಿ, ಅನೀಲ್ ಪೂಜಾರಿ,ವಿಕಾಶ್ ಶೆಟ್ಟಿಯವರು ಉಪಸ್ಥಿತರಿದ್ದರು.
