
ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಲು ಶಾಸಕ ರಾಜು ಕಾಗೆ ರಾಷ್ಟ್ರಪತಿ, ಪ್ರಧಾನಿ ಮತ್ತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಸೇರಿದಂತೆ 15 ಜಿಲ್ಲೆಗಳನ್ನೊಳಗೊಂಡ ಹೊಸ ರಾಜ್ಯ ರಚನೆಗೆ ಆಗ್ರಹ ವ್ಯಕ್ತಪಡಿಸಿರುವ ಅವರು, ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನಿರಂತರ ಅನ್ಯಾಯ ಮತ್ತು ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಜು ಕಾಗೆಯ ಈ ಪತ್ರದ ನಂತರ ಉತ್ತರ ಕರ್ನಾಟಕ ಹೋರಾಟ ಸಮಿತಿ ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯು ಕೂಡಾ ಹೋರಾಟದ ಧ್ವನಿಯನ್ನು ಎತ್ತಿದ್ದು, ಮೂವತ್ತು ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಎಚ್ಚರಿಕೆ ನೀಡಿದೆ.
ಪತ್ರದ ಪ್ರಮುಖ ಅಂಶಗಳು:
ರಾಜು ಕಾಗೆ ಅವರು ತಮ್ಮ ಪತ್ರದಲ್ಲಿ ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ದಾವಣಗೆರೆ — ಈ 15 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ರಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಅವರು ಮುಂದುವರೆದು, “ಕರ್ನಾಟಕ ಏಕೀಕರಣವಾದಾಗಿನಿಂದಲೇ ಉತ್ತರ ಕರ್ನಾಟಕ ಭಾಗಕ್ಕೆ ತಾರತಮ್ಯ ಹಾಗೂ ಮಲತಾಯಿ ಧೋರಣೆ ಮುಂದುವರಿದಿದೆ. ಆಡಳಿತಾತ್ಮಕ ಅನುಕೂಲತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯ ರಚನೆ ಅಗತ್ಯವಾಗಿದೆ,” ಎಂದು ತಿಳಿಸಿದ್ದಾರೆ.
ಅಲ್ಲದೆ, ಉತ್ತರ ಕರ್ನಾಟಕವು ಸಂಪನ್ಮೂಲಗಳ ನಾಡು ಆಗಿದ್ದು, ಕನ್ನಡದ ಉಳಿವು ಹಾಗೂ ಕರ್ನಾಟಕ ಏಕೀಕರಣ ಚಳವಳಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಕಾಗೆ ನೆನಪಿಸಿದ್ದಾರೆ.
ಉತ್ತರ ಕರ್ನಾಟಕ ಹೋರಾಟ ಸಮಿತಿ ಈಗಾಗಲೇ ಒಂದು ಕೋಟಿಗೂ ಅಧಿಕ ಜನರಿಂದ ಸಹಿ ಸಂಗ್ರಹಿಸಿದ್ದು, ರಾಷ್ಟ್ರಪತಿ, ರಾಜ್ಯಪಾಲ ಹಾಗೂ ಪ್ರಧಾನಿಗಳಿಗೆ ಮನವಿಪತ್ರ ಸಲ್ಲಿಸಿದೆ. “ಈ ಭಾಗದ ಜನರು ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಕೇಳುತ್ತಿದ್ದಾರೆ. ಈ ಮನವಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ವಿನಂತಿಸುತ್ತೇನೆ,” ಎಂದು ರಾಜು ಕಾಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.


