
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೆಮ್ಮಿಂಜೆ ಗ್ರಾಮದಲ್ಲಿ ಸಾರ್ವಜನಿಕರ ಸಮಯಪ್ರಜ್ಞೆಯಿಂದ ಅಂತರರಾಜ್ಯ ಕಳ್ಳಿಯರು ಸಿಕ್ಕಿಬಿದ್ದ ಘಟನೆ ನಡೆದಿದೆ.
ಡಿಸೆಂಬರ್ 24ರಂದು ಹೆಜಮಾಡಿಯ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆದ ನೇಮೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಮಾಡಿದ್ದ ಕಳ್ಳಿಯರ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ಈ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಗಮನಿಸಿದ ಸಾರ್ವಜನಿಕರು, ಕಳ್ಳತನದಲ್ಲಿ ಭಾಗಿಯಾಗಿದ್ದ ಮಹಿಳೆಯರೇ ಎಂದು ಗುರುತಿಸಿಕೊಂಡು ಕೆಮ್ಮಿಂಜೆ ಕಿರುಷಷ್ಠಿ ಸಂದರ್ಭದಲ್ಲೇ ಅವರನ್ನು ಹಿಡಿದುಕೊಂಡಿದ್ದಾರೆ.
ಸಮಯಪ್ರಜ್ಞೆ ತೋರಿದ ಸ್ಥಳೀಯರು ಕಳ್ಳಿಯರನ್ನು ಪುತ್ತೂರು ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರ ಜಾಗೃತಿಯಿಂದ ಕಳ್ಳತನ ಪ್ರಕರಣ ಭೇದನೆಯಾಗಿದ್ದು, ಸ್ಥಳೀಯರು ಪೊಲೀಸರ ಕಾರ್ಯಕ್ಕೆ ಸಹಕಾರ ನೀಡಿದ ಘಟನೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.


