ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ‘IAS’ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಂತಿಮವಾಗಿ ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಜಾರಿ ನಿರ್ದೇಶನಾಲಯ (ED) ಹಾಗೂ ಸಿಐಡಿ (CID) ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ ಬೆನ್ನಲ್ಲೇ ಜ್ಞಾನೇಂದ್ರ ಕುಮಾರ್ ತಲೆಮರೆಸಿಕೊಂಡಿದ್ದರು.

ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸಿಐಡಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆಯಲ್ಲಿ ಮನೆಗೆ ಬೀಗ ಜಡಿಯಲಾಗಿದ್ದು, ಸೂಕ್ತ ದಾಖಲೆಗಳಿಗಾಗಿ ಶೋಧ ನಡೆಸಿದ್ದ ಅಧಿಕಾರಿಗಳು, ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿ ಅವರ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ಬಂದಿದ್ದರು. ಅಧಿಕಾರಿಗಳ ಈ ಕಟ್ಟುನಿಟ್ಟಿನ ಕ್ರಮದ ಬಳಿಕ ಜ್ಞಾನೇಂದ್ರ ಕುಮಾರ್ ಅವರು ತಾವಾಗಿಯೇ ಸಿಐಡಿ ಕಚೇರಿಗೆ ಬಂದಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ, ಹಣಕಾಸಿನ ವಹಿವಾಟು ಹಾಗೂ ಪ್ರಭಾವಿಗಳ ಕೈವಾಡದ ಕುರಿತು ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿರುವುದರಿಂದ, ಜ್ಞಾನೇಂದ್ರ ಕುಮಾರ್ ನೀಡುವ ಹೇಳಿಕೆಗಳು ಈ ಅಕ್ರಮ ಜಾಲದ ಹಿಂದಿರುವ ಪ್ರಮುಖರ ಮುಖವಾಡ ಕಳಚಲು ನಿರ್ಣಾಯಕವಾಗುವ ಸಾಧ್ಯತೆಯಿದೆ.


