
ಪುತ್ತೂರು
ಆಂಕರ್: ಪುತ್ತೂರಿನ ನೆಹರೂನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.





ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾರ್, ಸಹಾಯಕ ಸುಳ್ಯದ ಆಶ್ರಫ್ ಮತ್ತು ವಿಜಯ್ ಬಂಧಿತ ಆರೋಪಿಗಳು.
ಲಾರಿಯಿಂದ ಕಳವಾದ 80 ಗೋಣಿ ಕಾಫಿ ಬೀಜ ಮತ್ತು ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಎರಡು ಆಟೋ ರಿಕ್ಷಾಗಳನ್ನು ಪೊಲೀಸರು ಆರೋಪಿಗಳಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ನೆಹರೂನಗರ ಶೇವಿರೆ ನಿವಾಸಿ ತೃತೇಶ್ ಎಂಬವರು ಮಂಗಳೂರು ಪಣಂಬೂರಿನ ಭವಾನಿ ಶಿಪ್ಪಿಂಗ್ ಸರ್ವಿಸ್ ಏಜೆನ್ಸಿಯಿಂದ ಪಿರಿಯಾಪಟ್ಟಣದಿಂದ ಮಂಗಳೂರಿನ ಬಂದರಿಗೆ ಕಾಫಿ ಬೀಜಗಳನ್ನು ಟ್ರಾನ್ಸ್ ಪೋರ್ಟ್ ಮಾಡಲು ಬುಕ್ಕಿಂಗ್ ಪಡೆದುಕೊಂಡು ತನ್ನ ಲಾರಿಯಲ್ಲಿ ಪಿರಿಯಾಪಟ್ಟಣದ ಹೈರೇಂಜ್ ಕಾಫಿ ಕ್ಯೂರಿಂಗ್ ಹೌಸ್ ಕಂಪನಿಯಿಂದ ಡಿ.3ರಂದು 320 ಗೋಣಿ ಕಾಫಿ ಬೀಜಗಳನ್ನು ಲೋಡ್ ಮಾಡಿಕೊಂಡು ಮಂಗಳೂರು ಬಂದರಿಗೆ ಹೊರಟು ಬಂದಿದ್ದವರು ದಾರಿ ಮಧ್ಯೆ ರಾತ್ರಿ ನೆಹರೂನಗರ ಬಳಿ ಲಾರಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು.
ಡಿ.4ರಂದು ಬೆಳಗ್ಗೆ ಬಂದು ಮಂಗಳೂರಿಗೆ ಹೋಗಿದ್ದರು ಮಂಗಳೂರು ಬಂದರಿನಲ್ಲಿ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಿದಾಗ ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡುಬಂದಿದ್ದು ಬಳಿಕ ಕಂಪೆನಿಯ ಮೇಲ್ವಿಚಾರಕರು ಲಾರಿಯ ಹಿಂಬದಿಯ ಬಾಗಿಲು ತೆರೆದು ನೋಡಿದಾಗ ಲಾರಿಯಲ್ಲಿದ್ದ 320 ಗೋಣಿ ಕಾಫಿ ಬೀಜಗಳ ಪೈಕಿ ರೂ.21.44 ಲಕ್ಷ ಮೌಲ್ಯದ 80 ಗೋಣಿ ಕಾಫಿ ಬೀಜ ಗಳು ಕಳವಾಗಿರುವುದು ಕಂಡುಬಂದಿತ್ತು.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡರು. ಸಿಸಿ ಕ್ಯಾಮರಾ ಆಧಾರಿಸಿ ಕಳ್ಳರ ಜಾಡು ಹಿಡಿದ ಪೊಲೀಸರು, ಕಳವಾಗಿದ್ದ ಕಾಫಿ ಬೀಜಗಳನ್ನು ಗೋಣಿಕೊಪ್ಪದಲ್ಲಿ ನಾಸೀರ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಪತ್ತೆ ಮಾಡಿದ್ದಾರೆ.
ಆಶ್ಲೇಷ್ ಭಟ್ ಪ್ರಮುಖ ಆರೋಪಿಯಾಗಿದ್ದು, ಆತ ಆಟೋ ರಿಕ್ಷಾಗಳನ್ನು ಬಾಡಿಗೆಗೆ ಗೊತ್ತುಪಡಿಸಿ ಕಾಫಿ ಬೀಜಗಳನ್ನು ಕಳವು ಮಾಡಿಸಿಕೊಂಡಿದ್ದು ನಾರಾಯಣ್ ಶೆಟ್ಟಿಗಾರ್ ಮತ್ತು ಮಿಥುನ್ ಕುಮಾರ್ ಆಟೋ ಚಾಲಕರಾಗಿ ಬಂದಿದ್ದರು.
ಇವರ ಜೊತೆಗೆ ಪಿಕಪ್ ಜೀಪಿನಲ್ಲಿ ಬದಲಿ ಚಾಲಕನಾಗಿ ಕೆಲಸಕ್ಕೆ ಹೋಗುತ್ತಿದ್ದ ಸುಳ್ಯದ ಆಶ್ರಫ್ ಸಹಾಯಕನಾಗಿ ಬಂದಿದ್ದ ವಿಚಾರ ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.


