
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರದಿಂದ ₹6 ಕೋಟಿ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಉಪಸ್ಥಿತರಿದ್ದರು.
1958ರಲ್ಲಿ ಸ್ಥಾಪನೆಯಾದ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಇದುವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆ ಇನ್ನಷ್ಟು ಕ್ರಿಯಾಶೀಲವಾಗಿದೆ ಎಂದು ಸಿಎಂ ಹೇಳಿದರು.
ತಮ್ಮ ಆಡಳಿತಾವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಇಡೀ ದೇಶದಲ್ಲಿಯೇ ಆಂಧ್ರಪ್ರದೇಶ ಮತ್ತು ಕೇರಳದಂತೆ ಕರ್ನಾಟಕದಲ್ಲಿಯೂ ಒಲಂಪಿಕ್ಸ್ ಸಂಸ್ಥೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಸಮಾನ ಪ್ರೋತ್ಸಾಹ ನೀಡುತ್ತಿದೆ ಎಂದರು.
ನಗದು ಬಹುಮಾನ ಘೋಷಣೆ
ರಾಜ್ಯ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಒಲಂಪಿಕ್ಸ್ನಲ್ಲಿ
- ಚಿನ್ನದ ಪದಕಕ್ಕೆ ₹6 ಕೋಟಿ,
- ಬೆಳ್ಳಿ ಪದಕಕ್ಕೆ ₹4 ಕೋಟಿ,
- ಕಂಚಿನ ಪದಕಕ್ಕೆ ₹3 ಕೋಟಿ
ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ತಿಳಿಸಿದರು. ಇದು ಕ್ರೀಡಾಪಟುಗಳನ್ನು ಉತ್ತೇಜಿಸುವ ಉದ್ದೇಶದಿಂದ ಕೈಗೊಳ್ಳಲಾದ ಕ್ರಮ ಎಂದು ಹೇಳಿದರು.
ಕಠಿಣ ಪರಿಶ್ರಮ ಮತ್ತು ಗುರಿಸಾಧನೆಯ ಛಲವಿದ್ದರೆ ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ನಲ್ಲಿ ಪದಕ ಗೆಲ್ಲಬಲ್ಲರು. ರಾಜ್ಯದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಮುಖ್ಯವಾಗಿದ್ದು, ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದು ಅವರು ತಿಳಿಸಿದರು.
ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ.3 ಮತ್ತು ಇತರ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ಒದಗಿಸಲಾಗುತ್ತದೆ. ಜನವರಿಯಲ್ಲಿ ಕ್ರೀಡಾ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಆದೇಶ ಹೊರಡಿಸಲಾಗುವುದು. ಹೆಚ್ಚಿನ ಯುವಕರು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಿಎಂ ಕರೆ ನೀಡಿದರು.


