ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಮೀನ ಸಂಕ್ರಮಣವಾದ ಇಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು.
ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಎನ್.ಐತ್ತಪ್ಪ ಸಪಲ್ಯರ ನೇತೃತ್ವದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ ನೆರವೇರಿತು.
ವೈದಿಕರಿಂದ ವೇದ, ಘೋಷ ಮಂತ್ರ, ಮೊಳಗಿತು. ಮಹಿಳೆಯರಿಂದ ಭಜನಾ ಸಂಕೀರ್ತಣೆ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಂಡು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ವರ್ಷದ ಕೊನೆಯ ಮಾಸವಾಗಿರುವ ಮೀನ ಸಂಕ್ರಮಣದಂದು ಸೂರ್ಯ ತನ್ನ ಪಥ ಬದಲಿಸುವ ಮಹತ್ವದ ಘಟ್ಟ. ಮೀನ ಸಂಕ್ರಮಣದಂದು ಸೂರ್ಯನ ರಶ್ಮಿ ದೇವಳದ ಗರ್ಭಗುಡಿಗೆ ಸ್ಪರ್ಶಿಸುವ ಪುಣ್ಯದಿನವಾಗಿದೆ. ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿ ನೆಲೆಸಿರುವ ದೇವಿಯ ಬಿಂಬಕ್ಕೆ ಸೂರ್ಯನ ಕಿರಣಗಳು ಮುಂಜಾನೆಯಲ್ಲಿ ಸ್ಪರ್ಶಿಸುವ ರಾಜ್ಯದ ಏಕೈಕ ದೇವಸ್ಥಾನ ಇದಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ದಿನ ಸಂಜೆಯ ವೇಳೆಗೆ ಸೂರ್ಯನ ರಶ್ಮಿಯು ಬಿಂಬವನ್ನು ಸ್ಪರ್ಶಿಸುತ್ತದೆ.
ದೇವಾಲಯದ ಪ್ರಮುಖರಾದ ಜನಾರ್ಧನ ಬೆಟ್ಟ, ಕೃಷ್ಣ ಪ್ರಸಾದ್ ಬೆಟ್ಟ, ಲಕ್ಷ್ಮೀ ಪ್ರಸಾದ್ ಬೆಟ್ಟ, ಲಕ್ಷ್ಮೀ ಅರ್ಪಣ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಮೊದಲಾದವರು ದೇವರ ಪುಣ್ಯಕಾರ್ಯದಲ್ಲಿ ಭಾಗಿಯಾದರು.
ಅನಿಶ್ ಪುತ್ತೂರು.


