ಕಾಸರಗೋಡು: ವಿಷ ಸೇವಿಸಿದ್ದ ಕಂದಾಯ ಇಲಾಖೆ ಸಿಬ್ಬಂದಿ ಆಶಾಲತಾ ಮೃತ್ಯು..!! ಸಾವಿನಲ್ಲಿ ಅನುಮಾನ

ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.
ಮೃತರನ್ನು ಎಡತೋಡ್ ನಿವಾಸಿ ಆಶಾಲತಾ(42) ಎಂದು ಗುರುತಿಸಲಾಗಿದೆ.
ಆಗಸ್ಟ್ 7 ರಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಅವರನ್ನು ಆರಂಭದಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಬಳಿಕ ಅವರನ್ನು ಕಣ್ಣೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕ್ಕೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೋಝಿಕ್ಕೋಡ್‌ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಶಾಲತಾ ಅವರು ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಆಶಾಲತಾ ಅವರು ತೀವ್ರ ಕೆಲಸದ ಒತ್ತಡದಲ್ಲಿದ್ದರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾನಸಿಕ ಕಿರುಕುಳ ಎದುರಿಸುತ್ತಿದ್ದರು. ಹೀಗಾಗಿಯೇ ಅವರು ಆತ್ಮಹತ್ಯೆಗೆ ಯತ್ನಿಸಲು ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಆರೋಪಿಸಿದ್ದಾರೆ. ಆಶಾಲತಾ ಅವರು ಈ ಹಿಂದೆ ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಎಂಡೋಸಲ್ಫಾನ್ ಸೆಲ್‌ಗೆ ವರ್ಗಾವಣೆಗೊಂಡಿದ್ದರು. ಹೊಸ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇದ್ದ ಕಾರಣ ಕೆಲಸದ ಹೊರೆ ಹೆಚ್ಚಾಗಿತ್ತು ಎಂದು ಆರೋಪಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಆಶಾಲತಾ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಕುಟುಂಬಸ್ಥರು ಕೂಡ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೆಲಸದ ಒತ್ತಡ ಮತ್ತು ಮಾನಸಿಕ ಕಿರುಕುಳದ ಆರೋಪಗಳ ಬಗ್ಗೆಯೂ ತನಿಖೆಯ ಭಾಗವಾಗಿ ಪರಿಶೀಲನೆ ನಡೆಸಲಾಗುತ್ತಿದೆ.

Star Of Kudla

Learn More →

Leave a Reply

Your email address will not be published. Required fields are marked *