ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ.

ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36) ಕೊಲೆ ಆರೋಪಿ ತಮ್ಮ.

ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮ ಇಬ್ಬರು ತಾಯಿಯೊಂದಿಗೆ ಕೊಟ್ಟಾರ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಮದ್ಯಪಾನದ ಚಟವಿತ್ತು ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ 10:30 ರಿಂದ 11 ಗಂಟೆಯ ನಡುವೆ ಮೊಬೈಲ್ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ರಾಜು ಚಾಕುವಿನಿಂದ ಅಡಿವೆಪ್ಪನಿಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ತಾಯಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ಸ್ಥಳಕ್ಕೆ ಉರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಾಜುವನ್ನು ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Star Of Kudla

Learn More →

Leave a Reply

Your email address will not be published. Required fields are marked *