
ಮಂಗಳೂರು; ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ, ಸಿಬ್ಬಂದಿಯೊಬ್ಬರು ದ.ಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಪಂಚಾಯತಿನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ , ಪ್ರಸ್ತುತ ದ.ಕ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಹೆಗಡೆ ಅವರೇ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ.
ಇವರು ಇದೀಗ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ಇಂದು ಕೂಡ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಸಿಬ್ಬಂದಿಗಳು ಕೂಡಲೇ ಅವರನ್ನು ನಗರದ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ಮಾಹಿತಿ ನೀಡಿದೆ.
2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಬೆಳ್ತಂಗಡಿ ತಾಲೂಕು ಪಂಚಾಯತಿನಲ್ಲಿ ಪ್ರಭಾರ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಳಿಕ ಮಂಗಳೂರಿನಲ್ಲಿ ಪ್ರಭಾರ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರ ಹುದ್ದೆ ಕಡಿರುದ್ಯಾವರ ಗ್ರಾಮ ಪಂಚಾಯತು ಕಾರ್ಯದರ್ಶಿಯದೇ ಆಗಿದ್ದು ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾಗಿದ್ದರು ಇವರಿಗೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಹಾಗಾಗಿ ಶ್ರೀಧರ ಹೆಗಡೆ ಅವರು ಕಳೆದ ಫೆಬ್ರವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು. ಈ ವಿಚಾರಕ್ಕೆ ಮನನೊಂದು ಅವರು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ
ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಲೆಕ್ಕಾಧೀಕ್ಷಕ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಆರೈಕೆಗೆ ನೆರವಾಗಿದ್ದಾರೆ , ಜೊತೆಗೆ ಅವರ ಕುಟುಂಬಸ್ಥರಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.


